
ತುಮಕೂರು : ಕೊರಟಗೆರೆ ತಾಲೂಕಿನ ಥರಟಿ ಗ್ರಾಮದ ಸರ್ವೆ ನಂ. ೭೬/೪ ರಲ್ಲಿರುವ ತಿಮ್ಮಕ್ಕ ಅವರ ಜಮೀನಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಭೇಟಿ ನೀಡಿ ಬೆಳೆಗಳ ಸ್ಥಿತಿ-ಗತಿಯನ್ನು ಪರಿಶೀಲಿಸಿದರು.
ನಂತರ ಮಾತನಾಡಿದ ಅವರು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಉಪಕರಣಗಳ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಅವರಿಗೆ ಸೂಚನೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಮಾತನಾಡಿ, ೨೦೨೫ನೇ ಸಾಲಿನಲ್ಲಿ ಕೊರಟಗೆರೆ ತಾಲೂಕಿನಲ್ಲಿ ಇದುವರೆಗೆ ಒಟ್ಟು ೩೭೪೮ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯಗಳು ನಡೆದಿದ್ದು, ಶೇಂಗಾ, ರಾಗಿ ಹಾಗೂ ಜೋಳ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಗೊಂಡಿವೆ ಎಂದು ಮಾಹಿತಿ ನೀಡಿದರು.
ತಾಲೂಕಿನಲ್ಲಿ ೩೦೭೧ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಈವರೆಗೂ ೧೨೧೦ ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಪ್ರಸ್ತುತ ೧೮೬೧ ಮೆಟ್ರಿಕ್ ಟನ್ ಲಭ್ಯವಿದ್ದು, ರೈತರಿಗೆ ಯಾವುದೇ ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ತಾಲೂಕಿನಲ್ಲಿರುವ ನಾಲ್ಕು ರೈತ ಸಂಪರ್ಕ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜಗಳ ದಾಸ್ತಾನು ಇದೆ ಎಂದು ತಿಳಿಸಿದರು.
ಈ ವೇಳೆ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.