Headlines

ಚರ್ಚೆ ಹುಟ್ಟು ಹಾಕಿದ ಹೊಸಬಾಳೆ ‘ಸಮಾಜವಾದ-ಜಾತ್ಯಾಜೀತ’ ಹೇಳಿಕೆ: ಸಂವಿಧಾನ ವಿರೋಧಿ ಎಂದ ಕೈಗೆ ಸಂತೋಷ್ ಕೌಂಟರ್

ಚರ್ಚೆ ಹುಟ್ಟು ಹಾಕಿದ ಹೊಸಬಾಳೆ ‘ಸಮಾಜವಾದ-ಜಾತ್ಯಾಜೀತ’ ಹೇಳಿಕೆ: ಸಂವಿಧಾನ ವಿರೋಧಿ ಎಂದ ಕೈಗೆ ಸಂತೋಷ್ ಕೌಂಟರ್


ದತ್ತಾತ್ರೇಯ ಹೊಸಬಾಳೆ, ಸಿದ್ದರಾಮಯ್ಯ

ಬೆಂಗಳೂರು, ಜೂನ್​ 27: ತುರ್ತು ಪರಿಸ್ಥಿತಿಗೆ (Emergency) 50 ವರ್ಷ ಕಾರ್ಯಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಯವರು (Dattatreya Hosabale) ನೀಡಿದ ಹೇಳಿಕೆ ಭಾರಿ ಚರ್ಚೆಯಾಗುತ್ತಿದೆ. ಸಂವಿಧಾನದ ಪೀಠಿಕೆಗೆ ಸೇರಿಸಲಾಗಿರುವ “ಸಮಾಜವಾದ” ಮತ್ತು “ಜಾತ್ಯಾಜೀತ” ಪದಗಳ ಕುರಿತು ಚರ್ಚೆಯಾಬೇಕು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಈ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್​ ನಾಯಕರು ಆರ್​ಎಸ್​ಎಸ್​ ಸಂವಿಧಾನ ವಿರೋಧಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕುತ್ತಿದೆ. ಹಾಗಿದ್ದರೆ, ಆರ್​ಎಸ್​ಎಸ್​​ ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು? ಕಾಂಗ್ರೆಸ್​ ನಾಯಕರು ಆರೋಪವೇನು? ಇಲ್ಲಿದೆ ವಿವರ.

ದತ್ತಾತ್ರೇಯ ಹೊಸಬಾಳೆ ಹೇಳಿಕೆ

ತುರ್ತು ಪರಿಸ್ಥಿತಿಗೆ 50 ವರ್ಷ ಕಾರ್ಯಕ್ರಮದಲ್ಲಿ ಮಾತನಾಡಿದ ದತ್ತಾತ್ರೇಯ ಹೊಸಬಾಳೆ, ತುರ್ತು ಪರಿಸ್ಥಿತಿಯ ಸಮಯದಲ್ಲಿ, “ಜಾತ್ಯಾತೀತ” ಮತ್ತು “ಸಮಜವಾದ” ಎಂಬ ಎರಡು ಪದಗಳನ್ನು ಸಂವಿಧಾನದ ಪೀಠಿಕೆಗೆ ಸೇರಿಸಲಾಗಿದೆ. ಅವು ಮೂಲ ಪೀಠಕೆಯ ಭಾಗವಾಗಿರಲಿಲ್ಲ. ಈಗ ಈ ಎರಡು ಪದಗಳು ಪೀಠಿಕೆಯಲ್ಲಿ ಇರಬೇಕೆ ಅಥವಾ ಬೇಡವೇ ಎಂಬುವುದರ ಬಗ್ಗೆ ದೇಶ ಚರ್ಚೆ ನಡೆಸಬೇಕು ಎಂದು ಹೇಳಿದರು.

ಇದನ್ನೂ ಓದಿ

ಆರ್​​ಎಸ್​ಎಸ್ ಸಂವಿಧಾನ ವಿರೋಧಿ: ಸಿಎಂ

ದತ್ತಾತ್ರೇಯ ಹೊಸಬಾಳೆಯವರು ನೀಡಿದ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿದ್ದು, “ಭಾರತೀಯ ಜನತಾಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್​ಎಸ್​ಎಸ್ ಸಂವಿಧಾನವನ್ನು ಅದರ ರಚನೆಯ ದಿನದಿಂದಲೇ ವಿರೋಧಿಸುತ್ತಾ ಬಂದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ” ಎಂದು ಪೋಸ್ಟ್​ ಹಾಕಿದ್ದಾರೆ.

“ಸಂವಿಧಾನದ ಪೀಠಿಕೆಯಿಂದ ‘’ಸಮಾಜವಾದಿ’’ ಮತ್ತು “ಜಾತ್ಯತೀತ” ಪದಗಳನ್ನು ಕಿತ್ತುಹಾಕಬೇಕೆಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿರುವುದು ಗಂಭೀರವಾಗಿ ಚರ್ಚೆ ನಡೆಯಬೇಕಾಗಿರುವ ಸಂಗತಿ. ಆಡಳಿತಾರೂಢ ಬಿಜೆಪಿಯ ‘’ಹೈಕಮಾಂಡ್” ನಿಂದಲೇ ಈ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕೆಂದು 140 ಕೋಟಿ ಜನರ ಪರವಾಗಿ ನಾನು ಪ್ರಧಾನಿ ಅವರನ್ನು ಆಗ್ರಹಿಸುತ್ತೇನೆ” ಟ್ವೀಟ್​ ಮಾಡಿದ್ದಾರೆ.

“ಭಾರತ ಸಮಾಜವಾದಿ ಮತ್ತು ಜಾತ್ಯತೀತ ದೇಶ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದ ಕಾರಣ ಸಂವಿಧಾನದ ಮೂಲಪೀಠಿಕೆಯಲ್ಲಿ ಈ ಪದಗಳನ್ನು ಪ್ರತ್ಯೇಕವಾಗಿ ಸೇರಿಸುವ ಅಗತ್ಯ ಪ್ರಾರಂಭದ ದಿನಗಳಲ್ಲಿ ಬರಲಿಲ್ಲ. ಆದರೆ ನಂತರದ ದಿನಗಳಲ್ಲಿ ಪ್ರಜಾಪ್ರಭುತ್ವದ ಮೂಲ ಆಶಯಗಳಾದ ಜಾತ್ಯತೀತತೆ ಮತ್ತು ಸಮಾಜವಾದದ ಮೇಲೆಯೇ ಆರ್ ಎಸ್ ಎಸ್ ಮತ್ತು ಜನಸಂಘಗಳು ದಾಳಿ ಮಾಡಲು ಶುರುಮಾಡಿದಾಗ ಪ್ರಧಾನಿ ಇಂದಿರಾ ಗಾಂಧಿಯವರು 42ನೇ ತಿದ್ದುಪಡಿ ಮೂಲಕ ಈ ಪದಗಳನ್ನು ಸೇರಿಸಬೇಕಾಯಿತು ಎನ್ನುವುದನ್ನು ಇಡೀ ದೇಶ ಇಂದು ಒಪ್ಪಿಕೊಂಡಿದೆ” ಎಂದು ಹೇಳಿದರು.

“ಸಂವಿಧಾನವನ್ನು ಆರ್ ಎಸ್ ಎಸ್ ವಿರೋಧಿಸುತ್ತಿರುವುದು ಹೊಸ ಬೆಳವಣಿಗೆಯೇನಲ್ಲ. ಭಾರತೀಯ ಜನತಾಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್ ಎಸ್ ಎಸ್ ಸಂವಿಧಾನವನ್ನು ಅದರ ರಚನೆಯ ದಿನದಿಂದಲೇ ವಿರೋಧಿಸುತ್ತಾ ಬಂದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ್ದ ನಾಲ್ಕೇ ದಿನಕ್ಕೆ ಅದನ್ನು ವಿರೋಧಿಸಿ ಆರ್ ಎಸ್ ಎಸ್ ಮುಖವಾಣಿ ಆರ್ಗನೈಸರ್ ಪತ್ರಿಕೆ ಸಂಪಾದಕೀಯವನ್ನು ಬರೆದಿತ್ತು” ಎಂದು ಆರೋಪಿಸಿದರು.

“‘’ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಭಾರತೀಯತೆಯಾಗಲಿ, ಪುರಾತನ ಭಾರತದ ಕಟ್ಟುಕಟ್ಟಳೆಗಳಾಗಲಿ ಇಲ್ಲ, ಇದೇ ಈ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ’’ ಎಂದು ಆರ್ಗನೈಸರ್ ಪತ್ರಿಕೆ ಸಂಪಾದಕೀಯ ಬರೆದಿತ್ತು. ‘’ ಭಾರತದ ಸಂವಿಧಾನ ಎನ್ನುವುದು ಬೇರೆ ದೇಶಗಳ ಸಂವಿಧಾನದ ಕಲಮ್​ಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆ, ಅದರಲ್ಲಿ ಭಾರತೀಯತೆಯೇ ಇಲ್ಲ ಎಂದು ಎಂ.ಎಸ್. ಗೋಲ್ವಾಲ್ಕರ್ ಹೇಳಿದ್ದರು. ‘’ಮನುಸ್ಮೃತಿಯೇ ನಿಜವಾದ ಹಿಂದೂ ಕಾನೂನು, ಅದೇ ಹಿಂದೂಗಳ ಪೂಜನೀಯ ಗ್ರಂಥ. ಈ ಮನುಸ್ಮೃತಿಯ ಆಶಯಗಳು ಸಂವಿಧಾನದಲ್ಲಿ ಇಲ್ಲ” ಎಂದು ವಿ.ಡಿ.ಸಾವರ್ಕರ್ ಹೇಳಿದ್ದರು” ಎಂದರು.

“ನಮ್ಮ ಸಂವಿಧಾನದ ಬಗ್ಗೆ ಆರ್ ಎಸ್ ಎಸ್ ಮತ್ತು ಅದರ ನಾಯಕರು ಬಹಿರಂಗವಾಗಿ ವ್ಯಕ್ತಪಡಿಸಿರುವ ಈ ಅಭಿಪ್ರಾಯವನ್ನು ಭಾರತೀಯ ಜನತಾ ಪಕ್ಷ ಇಲ್ಲಿಯವರೆಗೆ ತಿರಸ್ಕರಿಸಿಲ್ಲ. ಇದರ ಬದಲಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗೆಲ್ಲ ಒಂದೆಡೆ ಆರ್​ಎಸ್​ಎಸ್ ನಾಯಕರು ಮತ್ತು ಇನ್ನೊಂದೆಡೆ ಬಿಜೆಪಿಯ ಕೆಳಹಂತದ ನಾಯಕರು ಸಂವಿಧಾನ ಬದಲಾವಣೆಯ ಕೂಗು ಹಾಕುತ್ತಾ ‘’ಟೆಸ್ಟ್ ಡೋಸ್’’ ಕೊಡುತ್ತಾ ಜನರ ನಾಡಿ ಮಿಡಿತವನ್ನು ಪರೀಕ್ಷಿಸುವ ಪ್ರಯತ್ನ ಮಾಡುತ್ತಿರುತ್ತಾರೆ. ಬಿಜೆಪಿ ಈ ‘’ಕಳ್ಳಾಟ’’ವನ್ನು ದೇಶದ ಪ್ರಜ್ಞಾವಂತ ಜನ ಅರ್ಥಮಾಡಿಕೊಂಡಿದ್ದಾರೆ” ಎಂದು ಹೇಳಿದರು.

ಇದನ್ನೂ ನೋಡಿ: ಡಾ ಶ್ಯಾಮಾ ಪ್ರಸಾದ್ ಮುಖರ್ಜಿ ದೇಶದ ಐಕ್ಯತೆ ಮತ್ತು ಅಖಂಡತೆಗಾಗಿ ತಮ್ಮ ಬದುಕನ್ನೇ ಮುಡುಪಿಟ್ಟವರು: ಯಡಿಯೂರಪ್ಪ

“ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನು ಬದಲಾಯಿಸುವುದಾಗಿ ಬಿಜೆಪಿ ಪಕ್ಷದ ಕೆಲವು ಕೂಗುಮಾರಿಗಳಿಂದ ಘೋಷಣೆ ಮಾಡಿಸಿದ್ದ ಬಿಜೆಪಿ ಅದಕ್ಕೆ ತಕ್ಕ ಉತ್ತರ ಪಡೆದಿದ್ದಾರೆ ಎಂದು ಭಾವಿಸುವೆ. ನಮ್ಮ ನಡುವಿನ ಒಂದಷ್ಟು ಜಾತ್ಯತೀತ ನಿಲುವಿನ ಪಕ್ಷಗಳು ಅಧಿಕಾರದ ಲಾಲಸೆಯಿಂದ ರಾಜಿ ಮಾಡಿಕೊಳ್ಳದೆ ಇದ್ದರೆ ಬಿಜೆಪಿ ಇಂದು ವಿರೋಧಪಕ್ಷದ ಸ್ಥಾನದಲ್ಲಿ ಕೂರಬೇಕಾಗಿತ್ತು. ಇದರ ನಂತರವೂ ಬಿಜೆಪಿ ತನ್ನ ಕುಟಿಲ ಪ್ರಯತ್ನವನ್ನು ಮುಂದುವರಿಸಿರುವುದು ವಿಷಾದನೀಯ” ಎಂದು ವಾಗ್ದಾಳಿ ಮಾಡಿದರು.

“ಈಗಲೂ ಎಚ್ಚೆತ್ತುಕೊಳ್ಳದೆ ತಮ್ಮ ಕುಟಿಲ ಪ್ರಯತ್ನವನ್ನು ಹೀಗೆಯೇ ಮುಂದುವರಿಸಿದರೆ ದೇಶದ ಪ್ರಜಾಪ್ರಭುತ್ವಪ್ರೇಮಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ” ಎಂದು ಎಚ್ಚರಿಕೆ ನೀಡಿದ್ದಾರೆ.

ಟ್ವಿಟರ್ ಪೋಸ್ಟ್​

ಸಿಎಂ ಹೇಳಿಕೆಗೆ ಬಿಎಲ್ ಸಂತೋಷ ಕೌಟರ್

“ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ, ಮೂಲಭೂತ ಹಕ್ಕುಗಳನ್ನು ತುಳಿದಿದ್ದಕ್ಕಾಗಿ ಮತ್ತು ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇಶದ ಸಾಮಾಜಿಕ ರಚನೆಯನ್ನು ನಾಶಪಡಿಸಿದ್ದಕ್ಕಾಗಿ ಮೊದಲು ಕ್ಷಮೆಯಾಚಿಸಿ ಮತ್ತು ನಂತರ ಏನು ಮಾಡಬೇಕೆಂದು ಇತರರಿಗೆ ಸಲಹೆ ನೀಡಿ. ಸಲಹೆ ನೀಡುವ ಮೊದಲು ದಯವಿಟ್ಟು ಆ ದಿನಗಳಲ್ಲಿ ನೀವು ಬೇಲಿಯ ಯಾವ ಬದಿಯಲ್ಲಿ ಇದ್ದಿರಿ ಎಂದು ಖಚಿತಪಡಿಸಿಕೊಳ್ಳಿ. ಅಧಿಕಾರದ ಲಾಲಸೆ ರಾಜಕಾರಣಿಯನ್ನು ಕುರುಡನನ್ನಾಗಿ ಮಾಡುತ್ತದೆ ಮತ್ತು ಅನುಕೂಲಕರವಾದ ಸ್ಮರಣಶಕ್ತಿಯನ್ನು ಕಳೆದುಕೊಳ್ಳುತ್ತದೆ” ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:43 pm, Fri, 27 June 25





Source link

Leave a Reply

Your email address will not be published. Required fields are marked *