ಕೊಪ್ಪಳದ ಐತಿಹಾಸಿಕ ಹುಲಿಕೆರೆಯನ್ನು ಒತ್ತುವರಿ ಮಾಡಿ ದರ್ಗಾಕ್ಕೆ ಅಕ್ರಮವಾಗಿ ರಸ್ತೆ ನಿರ್ಮಿಸುತ್ತಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ರಾತ್ರೋರಾತ್ರಿ ಕೆರೆ ಏರಿ ಒಡೆದು ನೀರು ಹೊರಬಿಟ್ಟಿದ್ದು, ಅಧಿಕಾರಿಗಳ ಮೌನದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪಳ (ಫೆ.21): ಜಿಲ್ಲೆಯ ಐತಿಹಾಸಿಕ ಹುಲಿಕೆರೆಯನ್ನು ಒತ್ತುವರಿ ಮಾಡಿ ದರ್ಗಾಕ್ಕೆ ಅಕ್ರಮವಾಗಿ ರಸ್ತೆ ನಿರ್ಮಿಸುತ್ತಿರುವ ಘಟನೆ ಕೊಪ್ಪಳದಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಅಧಿಕಾರಿಗಳ ಮೌನಕ್ಕೆ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ನಾಯಕರು ಸ್ಥಳದಲ್ಲೇ ಪ್ರತಿಭಟನೆಗೆ ಕುಳಿತಿದ್ದು, ಮಸೀದಿ ಎದುರು ಜನರು ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ರಾತ್ರೋರಾತ್ರಿ ಕೆರೆ ಒಡೆದು ನೀರು ಹೊರಕ್ಕೆ!
ದರ್ಗಾಕ್ಕೆ ತೆರಳಲು ಅನುಕೂಲವಾಗುವಂತೆ ಅಕ್ರಮವಾಗಿ ರಸ್ತೆ ನಿರ್ಮಿಸಲು ಮುಸ್ಲಿಂ ಸಮುದಾಯದವರು ಹುಲಿಕೆರೆಯನ್ನು ಒತ್ತುವರಿ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಬಾರದೆಂದು ರಾತ್ರೋರಾತ್ರಿ ಕೆರೆಯ ಏರಿಯನ್ನು ಒಡೆದು ನೀರನ್ನು ಹೊರಗೆ ಬಿಡಲಾಗಿದೆ. ಈ ಕೃತ್ಯದಿಂದ ಕೆರೆಯ ಅಸ್ತಿತ್ವಕ್ಕೆ ಧಕ್ಕೆಯಾಗಿದೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ನಗರಸಭೆ ಅಧಿಕಾರಿಗಳ ವಿರುದ್ಧ ಎಂಎಲ್ಸಿ ಹೇಮಲತಾ ನಾಯಕ್ ಗರಂ
ಕಳೆದ ಎರಡು ದಿನಗಳಿಂದ ಅಕ್ರಮವಾಗಿ ಕಾಮಗಾರಿ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಬಿಜೆಪಿ ಎಂಎಲ್ಸಿ ಹೇಮಲತಾ ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ ಬಸವರಾಜ ಕ್ಯಾವಟರ್ ತೀವ್ರ ತರಾಟೆಗಗೆ ತೆಗೆದುಕೊಂಡರು. ಸ್ಥಳಕ್ಕೆ ಆಗಮಿಸಿದ ನಗರಸಭೆ ಕಮಿಷನರ್ ಮೇಲೆ ಗರಂ ಆದ ಎಂಎಲ್ಸಿ ‘ಅಕ್ರಮ ನಡೆಯುತ್ತಿದ್ದರೂ ನೀವು ಏನು ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.
ವಾಹನಗಳ ಸೀಜ್ಗೆ ಪಟ್ಟು; ಪೊಲೀಸರೊಂದಿಗೆ ವಾಗ್ವಾದ
ಪ್ರತಿಭಟನಾಕಾರರು ಮತ್ತು ಅಧಿಕಾರಿಗಳ ನಡುವೆ ಜೋರಾದ ವಾಗ್ವಾದ ನಡೆದಿದ್ದು, ಸ್ಥಳಕ್ಕೆ ಕೊಪ್ಪಳ ನಗರ ಠಾಣೆಯ ಪೊಲೀಸರು ಧಾವಿಸಿದ್ದಾರೆ. ಅಕ್ರಮ ರಸ್ತೆ ನಿರ್ಮಾಣಕ್ಕೆ ಬಳಸಲಾಗುತ್ತಿರುವ ಜೆಸಿಬಿ ಹಾಗೂ ಇತರೆ ವಾಹನಗಳನ್ನು ಕೂಡಲೇ ಸೀಜ್ ಮಾಡಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸುತ್ತಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ಷೇಪ
ಸರ್ಕಾರಿ ಆಸ್ತಿಯಾದ ಕೆರೆಯನ್ನು ಒತ್ತುವರಿ ಮಾಡುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಾಳೆ ಯಾರು ಬೇಕಾದರೂ ಒತ್ತುವರಿ ಮಾಡಿಕೊಳ್ಳಬಹುದಾ? ಅಧಿಕಾರಿಗಳು ಸುಮ್ಮನಿರ್ತಾರಾ? ಸಾರ್ವಜನಿಕ ಕೆರೆಯನ್ನು ರಕ್ಷಿಸಬೇಕಾದವರು ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆಯೇ? ಎಂದು ಪ್ರತಿಭಟನಾಕಾರರು ಪ್ರಶ್ನಿಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯ ಕೇಳಿಬರುತ್ತಿದೆ.
