
ದಾವಣಗೆರೆ (ಮಾ.19): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸಕರಿಯಪ್ಪ ಹೆಸರು ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಟಿಕೆಟ್ ಸಿಕ್ಕಿದ ಬೆನ್ನಲ್ಲೇ ಅಭ್ಯರ್ಥಿ ಶ್ರೀನಿವಾಸ ಅವರು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವ ಮೂಲಕ ತಮ್ಮ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ.
ಭೀಮಸಮುದ್ರದಲ್ಲಿ ಸಿದ್ದೇಶ್ವರ ಆಶೀರ್ವಾದ:
ಅಭ್ಯರ್ಥಿ ಘೋಷಣೆಯಾದ ನಂತರ ಶ್ರೀನಿವಾಸ ದಾಸಕರಿಯಪ್ಪ ಅವರು ನೇರವಾಗಿ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕರಿಗೆ ಕಾಲಿಗೆ ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಶ್ರೀನಿವಾಸ ಅವರ ಬೆನ್ನು ತಟ್ಟಿದ ಜಿ.ಎಂ. ಸಿದ್ದೇಶ್ವರ ಅವರು, ‘ಕ್ಷೇತ್ರದಲ್ಲಿ ಎಲ್ಲಾ ಕಡೆ ಉತ್ತಮ ಪ್ರಚಾರ ಮಾಡಿ, ಗೆದ್ದು ಬಾ’ ಎಂದು ಶುಭ ಹಾರೈಸಿದರು. ಅಲ್ಲದೆ, ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರ ಕಾಲಿಗೆ ಬಿದ್ದು ಶ್ರೀನಿವಾಸ ಆಶೀರ್ವಾದ ಪಡೆದರು.