
ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚಿನ ಕಡೆಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿರುವ ಕುರಿತು ತನಿಖೆ ಆರಂಭಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು (ಮಾ.21): ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚಿನ ಕಡೆಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿರುವ ಕುರಿತು ತನಿಖೆ ಆರಂಭಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಖಂಡ್ರೆ, ಕಾಡ್ಗಿಚ್ಚು ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿಯಬೇಕು. ಕೆಲವರು ಮೂಢನಂಬಿಕೆಯಿಂದ ಹಾಗೂ ಕಿಡಿಗೇಡಿಗಳು ಕಾಡಿಗೆ ಬೆಂಕಿ ಕೊಟ್ಟಿರಬಹುದು.
ಅಲ್ಲದೆ, ಕಾಡ್ಗಿಚ್ಚು ವೀಕ್ಷಕರ ಕೊರತೆ ಇರುವುದರಿಂದಲೂ ಅದನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಹೀಗಾಗಿ ಕಾಡ್ಗಿಚ್ಚಿಗೆ ಸೂಕ್ತ ಕಾರಣ ತಿಳಿಯಲು ಮಂಗಳೂರು ವಿಭಾಗದ ಅರಣ್ಯಾಧಿಕಾರಿ ಮರಿಯಪ್ಪ ಕರಿಕಳನ್ ಅವರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು. 7 ದಿನಗಳಲ್ಲಿ ತನಿಖಾ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಯಾರಾದರೂ ಉದ್ದೇಶಪೂರ್ವಕವಾಗಿ ಕಾಡಿಗೆ ಬೆಂಕಿ ಹಚ್ಚಿದ್ದರೆ ಅದನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಅಧಿಕಾರಿ ಮತ್ತು ಸಿಬ್ಬಂದಿ ಲೋಪವಿದ್ದರೆ ಅವರ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡುವಂತೆ ಎಂದು ನಿರ್ದೇಶಿಸಿದರು. ಕುದುರೆಮುಖ ಅರಣ್ಯ ಪ್ರದೇಶದಲ್ಲಿನ ನಿವಾಸಿಗಳು ಸ್ವಯಂ ಪ್ರೇರಿತವಾಗಿ ಹೊರಬರಲು ಇಚ್ಛಿಸಿದ್ದಾರೆ. ಆ ಬಗ್ಗೆಯೂ ಸಮಗ್ರ ವರದಿ ಸಿದ್ಧಪಡಿಸಿ ನೀಡಬೇಕು. ಹಾಗೆಯೇ, ಕಾಂಪಾ ನಿಧಿಯಿಂದ ಅರಣ್ಯ ವಾಸಿಗಳ ಸ್ಥಳಾಂತರ ಕುರಿತಂತೆ ವಾರ್ಷಿಕ ಕ್ರಿಯಾಯೋಜನೆ ಸೇರಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ವನ್ಯಜೀವಿ ಚಿಕಿತ್ಸೆಗೆ ಎಸ್ಒಪಿ
ಶಿವಮೊಗ್ಗದ ಮೃಗಾಲಯದಲ್ಲಿ ಯುವ ಪಶು ವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟ ಕುರಿತಂತೆಯೂ ಪ್ರಸ್ತಾಪಿಸಿದ ಈಶ್ವರ್ ಖಂಡ್ರೆ, ಯಾವುದೇ ಸಿಬ್ಬಂದಿ ಅಥವಾ ಪಶು ವೈದ್ಯರು ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಕಡ್ಡಾಯವಾಗಿ ಪ್ರಮಾಣಿತ ಮಾನದಂಡ (ಎಸ್ಒಪಿ) ಪಾಲಿಸಬೇಕು. ಈ ಕುರಿತು ಎಲ್ಲ ಸಿಬ್ಬಂದಿ ಮತ್ತು ಪಶು ವೈದ್ಯರಿಗೆ ಸ್ಪಷ್ಟ ಸೂಚನೆ ನೀಡಬೇಕು.
ಇನ್ನು, ಯುವ ವೈದ್ಯೆ ಸಾವಿನಿಂದ ನೋವು ತಂದಿದೆ. ಅವರ ಕುಟುಂಬಕ್ಕೆ 30 ಲಕ್ಷ ರು. ಪರಿಹಾರ ನೀಡಬೇಕು. ಜತೆಗೆ ಪ್ರಕರಣ ಕುರಿತಂತೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ 7 ದಿನಗಳಲ್ಲಿ ವರದಿ ನೀಡುವಂತೆ ಹೇಳಿದರು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಇದ್ದರು.