
<p><strong>ಬೆಂಗಳೂರು (ಏ.2): </strong>ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ (ಎಸ್ಎಸ್ಎಲ್ಸಿ) ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆಯಡಿ ಒಂಬತ್ತು ವಿಷಯಗಳಲ್ಲಿ ಪಾಸ್-ಫೇಲ್ ಪದ್ಧತಿ ರದ್ದುಪಡಿಸಿ, ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. </p><p>ಹಿಂದಿ ಸೇರಿ ತೃತೀಯ ಭಾಷೆಯಡಿ ಒಂಬತ್ತು ವಿಷಯಗಳಲ್ಲಿ ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ನೀಡಿರುವ ಹೇಳಿಕೆಗಳನ್ನು ರದ್ದುಪಡಿಸಬೇಕು ಎಂದು ಕೋರಿ ಬೆಂಗಳೂರಿನ ದೊಡ್ಡಬಿದರಕಲ್ಲು ನಿವಾಸಿ ಎಚ್.ಎನ್.ಚಂದನಾ ಮತ್ತು ನೆಲಮಂಗಲ ತಾಲೂಕಿನ ಗುಡೇನಹಳ್ಳಿ ನಿವಾಸಿ ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.</p><p>ಅರ್ಜಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.</p><h2>ಅರ್ಜಿದಾರರ ಆಕ್ಷೇಪವೇನು?:</h2><p>ಸಚಿವ ಮಧು ಬಂಗಾರಪ್ಪ ಅವರು ಮಾ.28ರಂದು ಪತ್ರಿಕಾಗೋಷ್ಠಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆಯಡಿ ಒಂಬತ್ತು ವಿಷಯಗಳಲ್ಲಿ ಪಾಸ್-ಫೇಲ್ ಪದ್ಧತಿ ರದ್ದುಪಡಿಸಲಾಗುವುದು. ಅಂಕಗಳ ಬದಲಿಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರ ಜಾರಿಗೆ ತರಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.</p><p>ಆದರೆ ಸಚಿವರು ಈ ನಿರ್ಧಾರ ಪ್ರಕಟಿಸುವ ಮುನ್ನ ಸಾರ್ವಜನಿಕವಾಗಿ ಚರ್ಚೆ ನಡೆಸಿಲ್ಲ. ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ. ಭಾಷಾ ತಜ್ಞರ ಸಲಹೆ ಪಡೆದಿಲ್ಲ. ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಪ್ರಕಟಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ಸಚಿವರು ಈ ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸುವುದಾಗಿ ಹೇಳಿಕೆ ನೀಡಿರುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಸಾರ್ವಜನಿಕರಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.</p><p>ಗ್ರೇಡಿಂಗ್ ವ್ಯವಸ್ಥೆ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಮತ್ತೊಂದೆಡೆ ಸಚಿವರ ಹೇಳಿಕೆ ಬೆಂಬಲಿಸುವ ಯಾವುದೇ ಅಧಿಕೃತ ಸರ್ಕಾರಿ ಆದೇಶ ಅಥವಾ ಅಧಿಸೂಚನೆ ಈವರೆಗೂ ಹೊರಬಿದ್ದಿಲ್ಲ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರಲು ಸಾಧ್ಯವಿಲ್ಲ. ಸಚಿವರ ಈ ನಿರ್ಧಾರ ಸಂವಿಧಾನದ ಪರಿಚ್ಛೇಧ 14ರಡಿ ಸಮಾನತೆ ಹಕ್ಕು ಉಲ್ಲಂಘಿಸುತ್ತದೆ. ಪರಿಚ್ಛೇದ 21ಎ ಶಿಕ್ಷಣ ಹಕ್ಕಿನ ಮೇಲೆ ಪರಿಣಾಮ ಬೀರಲಿದೆ. ತಾರತಮ್ಯ ನೀತಿಯಿಂದ ಕೂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯವನ್ನೇ ಅಸ್ಥಿರಗೊಳಿಸುತ್ತದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.</p>
Source link
ಎಸ್ಸೆಸ್ಸೆಲ್ಸಿಯಲ್ಲಿ ಆಟಕ್ಕುಂಟು, ಲೆಕಕ್ಕೆಇಲ್ಲದ ಹಿಂದಿ ಕೇಸ್ ಹೈಕೋರ್ಟ್ಗೆ