Headlines

ರೈತರು, ಕೃಷಿ ಕುಟುಂಬದ ಯುವಕರಿಗೆ ಕಿರು ಉದ್ದಿಮೆ ಮಾದರಿ: ಕೃಷಿ ಸಚಿವ ಚಲುವರಾಯಸ್ವಾಮಿ | Small Business Model For Young Farmers Says N Chaluvarayaswamy Gvd

ರೈತರು, ಕೃಷಿ ಕುಟುಂಬದ ಯುವಕರಿಗೆ ಕಿರು ಉದ್ದಿಮೆ ಮಾದರಿ: ಕೃಷಿ ಸಚಿವ ಚಲುವರಾಯಸ್ವಾಮಿ | Small Business Model For Young Farmers Says N Chaluvarayaswamy Gvd



ರೈತರು, ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುತ್ತಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ (ಜು.24): ರೈತರು, ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುತ್ತಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ. ಬೇರೆಯವರ ಎದುರು ಕೆಲಸಕ್ಕೆ ಅಂಗಲಾಚದೆ, ಅವಲಂಬಿತರಾಗದೆ, ಸ್ವಾವಲಂಬಿ ಜೀವನ ಕಂಡುಕೊಳ್ಳುವುದಕ್ಕೆ ಸಹಕಾರಿಯಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೃಷಿಯತ್ತ ಎಷ್ಟು ಹತ್ತಿರ ಹೋಗುವಿರೋ ಅಷ್ಟು ಲಾಭವಿದೆ. ಯುವಕರು ಕೃಷಿಯ ಕಡೆ ಆಸಕ್ತರಾದಾಗ ಸ್ವಾವಲಂಬಿಗಳಾಗಿ ಜೀವನ ಸಾಗಿಸಬಹುದು. ಜಿಲ್ಲೆಯಲ್ಲಿ ಭತ್ತ, ಕಬ್ಬು, ತೆಂಗು, ರಾಗಿ, ಅಡಕೆ, ತರಕಾರಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಬೆಳೆದ ಕಚ್ಚಾ ಬೆಳೆಯನ್ನು ಮಾರಾಟ ಮಾಡುತ್ತಿದ್ದಾರೆಯೇ ವಿನಃ ಅದನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿಲ್ಲ. ಇದರಿಂದ ವೈಜ್ಞಾನಿಕ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ ಎಂದರು.

ಸಾಮಾನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರು ತೊಡಗುವುದಕ್ಕೂ ವ್ಯತ್ಯಾಸವಿದೆ. ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ವಿದ್ಯೆ ಜ್ಞಾನಕ್ಕೆ ದಾರಿಯಾದರೆ ವೃತ್ತಿ ಜೀವನಕ್ಕೆ ದಾರಿಯಾಗಿದೆ. ಒಂದು ಎಕರೆ ಜಮೀನಿನಲ್ಲಿ ಕಡಿಮೆ ಖರ್ಚು, ಕಡಿಮೆ ಅವಧಿ, ಕಡಿಮೆ ನೀರಿನಲ್ಲಿ ಯಾವ ಬೆಳೆ ಬೆಳೆಯಬಹುದೆಂಬ ಬಗ್ಗೆ ವಿಜ್ಞಾನಿಗಳು, ಕೃಷಿ ವಿವಿ ಅಧಿಕಾರಿಗಳಿಂದ ತಿಳಿವಳಿಕೆ ಪಡೆದುಕೊಂಡು ಪ್ರಾಯೋಗಿಕವಾಗಿ ಪ್ರಯತ್ನಿಸಿದರೆ ಅದರಲ್ಲಿರುವ ಲಾಭದ ಅರಿವಾಗುತ್ತದೆ ಎಂದು ಸಲಹೆ ನೀಡಿದರು.

ಕಿರು ಉದ್ದಿಮೆ ನಡೆಸುವ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರು. ಸಬ್ಸಿಡಿಯಲ್ಲಿ ೯ ಲಕ್ಷ ರು. ಸಬ್ಸಿಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರು. ಸಬ್ಸಿಡಿಯನ್ನು ಮಾತ್ರ ಕೇಂದ್ರ ಭರಿಸುತ್ತಿದೆ. ನೀವು ಬೆಳೆದ ಬೆಳೆಯನ್ನು ತಕ್ಷಣಕ್ಕೆ ಮಾರದೆ ಅದನ್ನು ಸಂಸ್ಕರಣೆ ಮಾಡಿ, ಬ್ರ್ಯಾಂಡ್ ರೂಪ ಕೊಡಿ. ವೈವಿಧ್ಯಮಯ, ನಾವಿನ್ಯತೆಯ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ನೀಡಿದರೆ ಅಧಿಕ ಲಾಭ ಸಂಪಾದಿಸಬಹುದು. ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಜಿಲ್ಲೆಯ ಪ್ರತಿಯೊಂದು ಕುಟುಂಬವೂ ಸ್ವಾವಲಂಬಿಯಾಗಿ ಬದುಕಬೇಕು. ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ಕೃಷಿ ಉತ್ಪನ್ನಗಳಲ್ಲಿ ವೈವಿಧ್ಯತೆಯನ್ನು ಮೆರೆಯುತ್ತಾ ಉತ್ತುಂಗ ಸ್ಥಾನಕ್ಕೇರಬೇಕೆಂಬ ಆಶಯ ವ್ಯಕ್ತಪಡಿಸಿದರು.

ಮಹಿಳೆಯರಲ್ಲೂ ಉತ್ತಮ ಕೈರುಚಿಯ ಗುಣವಿದೆ. ನೀವು ತಯಾರಿಸುವ ತಾಜಾ ಹಾಗೂ ಉತ್ತಮ ಗುಣಮಟ್ಟದ ಆಹಾರೋತ್ಪನ್ನಗಳನ್ನು ಬ್ರ್ಯಾಂಡ್ ಮಾಡಿದರೆ ಮಾರುಕಟ್ಟೆ ಮುಂದಿಟ್ಟರೆ ಬೇಡಿಕೆ ತನ್ನಿಂತಾನೇ ಸೃಷ್ಟಿಯಾಗುತ್ತದೆ. ಪ್ರಯತ್ನಬಲವನ್ನು ಎಲ್ಲರೂ ರೂಢಿಸಿಕೊಳ್ಳುವ ಅಗತ್ಯವಿದೆ. ಆಸಕ್ತಿಯಿಂದ ಕೃಷಿ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಆಹಾರೋತ್ಪನ್ನಗಳನ್ನು ತಯಾರಿಸಿದರೆ ಮುಂದೆ ಲಾಭದಾಯಕ ಉದ್ಯಮವಾಗಿ ಪರಿವರ್ತಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್, ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥ್, ಜಿಲ್ಲಾಧ್ಯಕ್ಷ ನಾಗರಾಜು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಎನ್.ಜೆ.ರಾಜೇಶ್, ಕಾರಸವಾಡಿ ಮಹದೇವು ಸೇರಿದಂತೆ ಇತರರಿದ್ದರು.



Source link

Leave a Reply

Your email address will not be published. Required fields are marked *