
ಸೆಪ್ಟೆಂಬರ್ 9 ರಿಂದ ಆರಂಭವಾಗುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ 15 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶುಭ್ಮನ್ ಗಿಲ್ ಉಪನಾಯಕರಾಗಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸಲಿದ್ದಾರೆ. ಕರ್ನಾಟಕದ ಯಾವ ಆಟಗಾರರಿಗೂ ಸ್ಥಾನ ಸಿಕ್ಕಿಲ್ಲ.
ಮುಂಬೈ: ಮುಂಬರುವ ಸೆಪ್ಟೆಂಬರ್ 09ರಿಂದ ಆರಂಭವಾಗಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಶುಭ್ಮನ್ ಗಿಲ್ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಅನುಭವಿ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದು, ಕರ್ನಾಟಕದ ಯಾವೊಬ್ಬ ಆಟಗಾರನಿಗೂ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಶುಭ್ಮನ್ ಗಿಲ್ ಅವರಿಗೆ ಬಿಸಿಸಿಐ ಆಯ್ಕೆ ಸಮಿತಿಯು ನಿರೀಕ್ಷೆಯಂತೆಯೇ ಉಪನಾಯಕ ಪಟ್ಟ ಕಟ್ಟಿದೆ. ವಿಕೆಟ್ ಕೀಪರ್ ಬ್ಯಾಟರ್ ಆಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಕುಮಾರ್ಗೆ ತಂಡದಲ್ಲಿ ಮಣೆ ಹಾಕಲಾಗಿದೆ. ಜಿತೇಶ್ ಕುಮಾರ್ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಪರ ಒಳ್ಳೆಯ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿದ್ದರು. ಇನ್ನುಳಿದಂತೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್ ಜತೆಗೆ ಮೂರನೇ ತಜ್ಞ ವೇಗಿಯಾಗಿ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ ಸ್ಥಾನ ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಟಿ20 ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ವಿಫಲವಾಗಿದ್ದಾರೆ.
2023ರಲ್ಲಿ ನಡೆದ ಏಷ್ಯಾಕಪ್ ಟೂರ್ನಿಯು ಏಕದಿನ ಮಾದರಿಯಲ್ಲಿ ನಡೆದಿತ್ತು. ಆಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ಹಾಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸೂರ್ಯಕುಮಾರ್ ನೇತೃತ್ವದ ಟೀಂ ಇಂಡಿಯಾ ರೆಡಿಯಾಗಿದೆ.
2025ರ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದ್ದು, ಪ್ರಶಸ್ತಿಗಾಗಿ ಏಷ್ಯಾದ 8 ಬಲಿಷ್ಠ ತಂಡಗಳು ಕಾದಾಡಲಿವೆ. 8 ತಂಡಗಳನ್ನು ತಲಾ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ‘ಎ’ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಓಮನ್ ಹಾಗೂ ಯುಎಇ ತಂಡಗಳು ಸ್ಥಾನ ಪಡೆದಿವೆ. ಇನ್ನು ‘ಬಿ’ ಗುಂಪಿನಲ್ಲಿ ಆಫ್ಘಾನಿಸ್ತಾನ, ಬಾಂಗ್ಲಾದೇಶ, ಹಾಂಕಾಂಗ್ ಹಾಗೂ ಶ್ರೀಲಂಕಾ ತಂಡಗಳು ಸ್ಥಾನ ಪಡೆದಿವೆ.