
ಮೈಸೂರು ಅರಮನೆ ಬಳಿ ನೈಟ್ರೋಜನ್ ಸಿಲಿಂಡರ್ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ, ಅರಮನೆಯ ಜಯಮಾರ್ತಂಡ ದ್ವಾರ ಬಳಿ ಘಟನೆ ನಡೆದಿದೆ. ಗಾಯಾಳುಗಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಆರೋಗ್ಯ ಗಂಭೀರವಾಗಿದೆ.
ಮೈಸೂರು (ಡಿ.25) ರಜಾ ದಿನ ಹಿನ್ನಲೆಯಲ್ಲಿ ಮೈಸೂರು ಅರಮನೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಹೆಚ್ಚು. ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರು ಅರಮನೆ ಹಾಗೂ ಸುತ್ತ ಮುತ್ತ ಇರುವಾಗಲೇ ನೈಟ್ರೋಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ. ಅರಮನೆಯ ಜಯಮಾರ್ತಂಡ ದ್ವಾರ ಬಳಿ ಈ ದುರ್ಘಟನೆ ನಡೆದಿದೆ. ಬಲೂನ್ ಗ್ಯಾಸ್ ಸಿಡಿದು ಅವಘಡ ನಡೆದಿದೆ. ಘಟನೆಯಲ್ಲಿ ಓರ್ವ ಮೃತಪಟ್ಟದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಲೂನ್ ಗೆ ಗ್ಯಾಸ್ ತುಂಬುವಾಗ ದುರ್ಘಟನೆ
ಮೈಸೂರಿನ ಅರಮನೆ ಸೇರಿದಂತೆ ಮೈಸೂರಿಗೆ ಇಂದು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರ. ಹೀಗಾಗಿ ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ವ್ಯಾಪಾರಸ್ಥರು ಭಾರಿ ತಯಾರಿಯೊಂದಿಗೆ ವ್ಯಾಪರ ಮಾಡುತ್ತಿದ್ದರು. ಮಕ್ಕಳ ಪ್ರಮುಖ ಆಕರ್ಷಣೆಯಾಗಿರುವ ನೈಟ್ರೋಜನ್ ಬಲೂನ್ ಎಲ್ಲೆಡೆ ಲಭ್ಯವಿದೆ. ಹೀಗೆ ಅರಮನೆಯ ಜಯಮಾರ್ತಂಡ ದ್ವಾರ ಬಳಿ ನೈಟ್ರೋಜನ್ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳ ಬಳಿ ಗ್ರಾಹಕರು ಬಲೂನ್ ಖರೀದಿಸಲು ತೆರಳಿದ್ದಾರೆ. ಈ ವೇಳೆ ಬಲೂನ್ಗೆ ಗ್ಯಾಸ್ ತುಂಬುವ ವೇಳೆ ದುರ್ಘಟನೆ ನಡೆದಿದೆ. ಗ್ಯಾಸ್ ಬಲೂನ್ ಸಿಡಿದ ಬೆನ್ನಲ್ಲೇ ನೈಟ್ರೋಜನ್ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿದ್ದ ಎಲ್ಲರೂ ಗಾಯಗೊಂಡಿದ್ದಾರೆ. ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.