
79ನೇ ಸ್ವಾತಂತ್ರ್ಯೋತ್ಸವದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಶುಭಾಶಯ ಕೋರಿ, ಗ್ಯಾರಂಟಿ ಯೋజನೆಗಳ ಯಶಸ್ಸು ಮತ್ತು ರಾಜ್ಯದ ಆರ್ಥಿಕ ಪ್ರಗತಿಯನ್ನು ಶ್ಲಾಘಿಸಿದರು. ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ ಸರ್ಕಾರದ ಕಾರ್ಯವೈಖರಿಯನ್ನು ವಿವರಿಸಿದರು.
ಬೆಂಗಳೂರು, (ಆ.15): 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದು, ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗದ ಕೊಡುಗೆ ಹಾಗೂ ದೇಶ ರಕ್ಷಣೆಯಲ್ಲಿ ಸೈನಿಕರ ತ್ಯಾಗವನ್ನು ಕೊಂಡಾಡಿದರು.
ತಮ್ಮ ಭಾಷಣದಲ್ಲಿ, ದೇಶದ ಸಂಪತ್ತಿನ ಅಸಮಾನ ಹಂಚಿಕೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ಅಸಮಾನತೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಮಹಿಳೆಯರ ಆರ್ಥಿಕ ಪಾಲ್ಗೊಳ್ಳುವಿಕೆಗೆ ಮೆಚ್ಚುಗೆ: ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆಯನ್ನು ಶ್ಲಾಘಿಸಿದ ಸಿದ್ದರಾಮಯ್ಯ, ಶಕ್ತಿ ಯೋಜನೆಯಿಂದ 500 ಕೋಟಿ ಉಚಿತ ಬಸ್ ಪ್ರಯಾಣಗಳ ಮೂಲಕ ಮಹಿಳೆಯರ ಕಾರ್ಮಿಕ ಶಕ್ತಿಯ ಭಾಗವಹಿಸುವಿಕೆ ಶೇ.23ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳಿಗಾಗಿ 96,000 ಕೋಟಿ ರೂ.ಗಿಂತಲೂ ಹೆಚ್ಚಿನ ಹಣವನ್ನು ವಿನಿಯೋಗಿಸಲಾಗಿದೆ ಎಂದು ಅವರು ಹೇಳಿದರು.
ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ದಿಕ್ಕಿನಲ್ಲಿ: ನಮ್ಮ ಸರ್ಕಾರ ಬಸವಣ್ಣನವರ ಕಲ್ಯಾಣ ರಾಜ್ಯದ ಕನಸನ್ನು ಈಡೇರಿಸುವ ದಿಶೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಅಭಿವೃದ್ಧಿ ಮಾದರಿಯು ವಿಶ್ವಸಂಸ್ಥೆಯಿಂದ ಮನ್ನಣೆ ಪಡೆದಿದೆ, ಎಂದು ಸಿಎಂ ಹೇಳಿದರು. ರಾಜ್ಯದ ತಲಾದಾಯ 2013-14ರಲ್ಲಿ 1,01,858 ರೂ. ಇದ್ದದ್ದು 2024-25ರಲ್ಲಿ 2,04,605 ರೂ.ಗೆ ಏರಿಕೆಯಾಗಿದ್ದು, ಶೇ.101ರಷ್ಟು ಪ್ರಗತಿಯನ್ನು ಸಾಧಿಸಿದೆ ಎಂದು ಅವರು ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ: ಗಾಂಧೀಜಿ, ನೆಹರು, ಸುಭಾಷ್ ಚಂದ್ರ ಬೋಸ್, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದ ಸಿಎಂ, ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದರು.
ಅಸಮಾನತೆಯ ವಿರುದ್ಧ ಗ್ಯಾರಂಟಿ ಯೋಜನೆಗಳು: ದೇಶದ ಶೇ.10ರಷ್ಟು ಶ್ರೀಮಂತರ ಬಳಿ ಶೇ.80ರಷ್ಟು ಸಂಪತ್ತು ಶೇಖರವಾಗಿರುವುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಈ ಅಸಮಾನತೆಯನ್ನು ಕಡಿಮೆ ಮಾಡಲು ಗ್ಯಾರಂಟಿ ಯೋಜನೆಗಳು ಕಾರಣವಾಗಿವೆ ಎಂದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳು ಜನರ ತಲಾದಾಯವನ್ನು ಹೆಚ್ಚಿಸಿವೆ ಎಂದು ಅವರು ಹೇಳಿದರು.
ಕೃಷಿ, ಶಿಕ್ಷಣ, ಆರೋಗ್ಯಕ್ಕೆ ಒತ್ತು: ಕೃಷಿ ವಲಯಕ್ಕೆ 51,339 ಕೋಟಿ ರೂ., ಶಿಕ್ಷಣಕ್ಕೆ 65,000 ಕೋಟಿ ರೂ., ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸಿಎಂ ಉಲ್ಲೇಖಿಸಿದರು. ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ಸ್ಥಾಪನೆ ಮತ್ತು 53 ಲಕ್ಷ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆಯನ್ನು ಅವರು ಹೈಲೈಟ್ ಮಾಡಿದರು.
ಕರ್ನಾಟಕದ ಆರ್ಥಿಕ ಸಾಧನೆ: ಕರ್ನಾಟಕವು ತಲಾದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಕೈಗಾರಿಕಾ ಕ್ಷೇತ್ರದಿಂದ ಜಿಎಸ್ಡಿಪಿಗೆ ಶೇ.23.6ರಷ್ಟು ಕೊಡುಗೆ ನೀಡುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ತಿಳಿಸಿದರು.
ಸಂವಿಧಾನದ ರಕ್ಷಣೆಗೆ ಕರೆ: “ಸಂವಿಧಾನದ ಆಶಯಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ಸಮಾನತೆಯನ್ನು ಸಾಧಿಸುವುದು ನಮ್ಮ ಗುರಿಯಾಗಿದೆ,” ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಉಳಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.
ಜೈ ಹಿಂದ್, ಜೈ ಕರ್ನಾಟಕ, ಜೈ ಸಂವಿಧಾನ!