
<p><strong>ಕೊಪ್ಪಳ (ಆ.16): </strong>ತುಂಗಭದ್ರಾ w ಜಲಾಶಯದ ಏಳು ಗೇಟ್ಗಳು ಬೆಂಡ್ (ಬಾಗಿವೆ) ಆಗಿವೆ ಎಂದು ಅಣೆಕಟ್ಟೆ ಸುರಕ್ಷತಾ ಪರಿಶೀಲನಾ ಕಮಿಟಿ ವರದಿ ನೀಡಿದೆ. ಕ್ರಸ್ಟ್ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್ಗಳು ಬಾಗಿವೆ (ಬೆಂಡ್). ಇದರಲ್ಲಿ, 6 ಗೇಟ್ಗಳನ್ನು ಮೇಲೆ ಎತ್ತಲು ಹಾಗೂ ಇಳಿಸಲು ಆಗುತ್ತಿಲ್ಲ. ಗೇಟ್ ನಂಬರ್ 4 ಅನ್ನು ಕೇವಲ ಎರಡು ಅಡಿ ಮಾತ್ರ ಮೇಲಕ್ಕೆ ಎತ್ತಬಹುದು. ಗೇಟ್ ನಂ.4 ಸೇರಿದಂತೆ ಒಟ್ಟು 7 ಗೇಟ್ಗಳು ಹಾನಿ ಆಗಿವೆ. ಈಗ ಜಲಾಶಯದಲ್ಲಿ 80 ಟಿಎಂಸಿ ನೀರು ಮಾತ್ರ ಸಂಗ್ರಹ ಮಾಡಲಾಗುತ್ತಿದೆ. ಜಲಾಶಯದ ಒಳಹರಿವು ಏರಿದರೆ ಅಪಾಯ ಉಂಟಾಗಬಹುದು ಎಂಬ ಆತಂಕ ಮನೆ ಮಾಡಿದೆ.</p><p>ಜಲಾಶಯದ 19ನೇ ಕ್ರಸ್ಟ್ ಗೇಟ್ ಕಳೆದ ವರ್ಷ ಆ.10ರ ರಾತ್ರಿ ಕಳಚಿ ಬಿದ್ದಿತ್ತು. ಪರಿಣತ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಕಳೆದ ವರ್ಷ ಆ.17ರಂದು ಸ್ಟಾಪ್ ಲಾಗ್ ಅಳವಡಿಸಲಾಗಿತ್ತು. ಇದುವರೆಗೆ ಈ ಗೇಟ್ಗೆ ಶಾಶ್ವತ ಗೇಟ್ ಅಳವಡಿಸಿಲ್ಲ. ಗೇಟ್ ನಿರ್ಮಾಣಗೊಂಡಿದ್ದರೂ ಅಳವಡಿಕೆಗೆ ಒಳಹರಿವು ತೊಡಕಾಗಿದೆ. ಈ ಕಡೆ ಏಳು ಗೇಟ್ಗಳು ಕಾರ್ಯಾಚರಿಸಲು ಆಗದೇ ಇರುವುದರಿಂದ ಒಮ್ಮೆಲೇ 2 ಲಕ್ಷ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂದರೆ ಪರಿಸ್ಥಿತಿ ಏನು ಎಂಬ ಆತಂಕವೂ ಅಧಿಕಾರಿಗಳ ವಲಯದಲ್ಲಿ ಮನೆ ಮಾಡಿದೆ.</p><p>ಈ ವರ್ಷ 1 ಲಕ್ಷ 50 ಸಾವಿರ ಕ್ಯುಸೆಕ್ ವರೆಗೆ ನೀರು ನದಿಗೆ ಹರಿಸಲಾಗಿದೆ. 2 ಲಕ್ಷ ಕ್ಯುಸೆಕ್ ಮೀರಿ ನೀರು ಒಮ್ಮೆಲೇ ಹರಿದು ಬಂದರೆ ನದಿಗೆ ಬಿಡುವಾಗ ಯಾವ ರೀತಿ ನಿರ್ವಹಣೆ ಮಾಡಬೇಕು? ಇರುವ 32 ಗೇಟ್ಗಳಲ್ಲಿ ಏಳು ಗೇಟ್ಗಳು ಬೆಂಡಾಗಿರುವುದರಿಂದ ಈ ಮಳೆಗಾಲದಲ್ಲಿ ಪ್ರವಾಹ ಉಂಟಾಗದಿದ್ದರೆ ಅಪಾಯದಿಂದ ಪಾರಾಗುತ್ತೇವೆ. ಈಗಾಗಲೇ ಗದಗ ಬಳಿ ಕ್ರಸ್ಟ್ ಗೇಟ್ಗಳ ನಿರ್ಮಾಣ ಕಾರ್ಯ ನಡೆದಿದೆ. ತುಂಗಭದ್ರಾ ಮಂಡಳಿ ಅಧಿಕಾರಿಗಳು ಹಾಗೂ ಪರಿಣತರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಂಡಳಿ ಅಧಿಕಾರಿಗಳು ‘ಕನ್ನಡಪ್ರಭ’ಕ್ಕೆ ತಿಳಿಸಿದರು.</p><p>ಒಂದು ಕಡೆಯಲ್ಲಿ ಮಳೆ ಜೋರಾಗುತ್ತಿದೆ. ಇನ್ನೊಂದೆಡೆ ಈ ವರ್ಷ ಜಲಾಶಯ ಭರ್ತಿಯಾಗದಂತೆ ನೀರನ್ನು ಹರಿಬಿಡಲಾಗಿದೆ. ಇದರಿಂದ ಜಲಾಶಯಕ್ಕೆ ಬಾಗಿನ ಕೂಡ ಅರ್ಪಣೆ ಮಾಡಲಾಗಿಲ್ಲ. ಈ ನಡುವೆ ಏಳು ಗೇಟ್ಗಳು ಕೈಕೊಟ್ಟಿರುವುದು ಭಾರೀ ಚರ್ಚೆಗೀಡು ಮಾಡಿದೆ.</p><p>ಈ ಮಧ್ಯೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಕೊಪ್ಪಳದಲ್ಲಿ ಮಾತನಾಡಿ, 7 ಗೇಟ್ಗಳು ಬಾಗಿವೆ. ಹಾಗೂ ಇತರ ಗೇಟ್ನಲ್ಲಿ ಸಮಸ್ಯೆ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ತಜ್ಞರ ಸಮಿತಿ ನೀಡಿದ ವರದಿ ಹಿನ್ನೆಲೆಯಲ್ಲಿ ಈ ನಿಗಾ ಇಡಲಾಗಿದೆ. ಹೀಗಾಗಿ ಜಲಾನಯನ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾದರೆ ಆತಂಕವಾಗದಿರಲಿ ಎಂದು ಕಡಿಮೆ ನೀರು ಸಂಗ್ರಹಿಸಲಾಗುತ್ತಿದೆ. ಆದರೂ ಈಗಿರುವ ಮುಂಗಾರು ಬೆಳೆಗೆ ನೀರಿನ ಸಮಸ್ಯೆ ಇಲ್ಲ. ಆದರೆ, ಹಿಂಗಾರು ಬೆಳೆ ಕುರಿತು ಈಗಲೇ ಹೇಳಲು ಆಗದು ಎಂದರು.</p><p>—-</p><p><strong>ಕೇಂದ್ರ ಸರ್ಕಾರ ನಿರ್ಲಕ್ಷ್ಯ</strong></p><p>ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ಮುರಿದ ಮೇಲೆ ಸಮಸ್ಯೆ ಇರುವ ಉಳಿದ ಗೇಟ್ ದುರಸ್ತಿ ಮಾಡುವಲ್ಲಿ ತುಂಗಭದ್ರಾ ಬೋರ್ಡ್ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ ವಿಳಂಬವಾಗಿದೆ. ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ಬರೆದಿದ್ದೇವೆ.</p><p><strong>-ಶಿವರಾಜ ತಂಗಡಗಿ, ಸಚಿವ.</strong></p>
Source link
ತುಂಗಭದ್ರಾ ಡ್ಯಾಂನ 7 ಗೇಟ್ಗಳು ಸಂಪೂರ್ಣ ಜಾಮ್! ರೈತರು ಆತಂಕ, ಒಮ್ಮೆಲೆ 2 ಲಕ್ಷ ಟಿಎಂಸಿ ನೀರು ಹರಿದು ಬಂದ್ರೆ ಏನಾಗುತ್ತೆ?