ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ ಅಧಿಕಾರಿಗಳು ಎಸ್‌ಐಟಿಯಿಂದ ಔಟ್‌? | Dharmasthala Village Case Two Ips Officers Removed From Sit Gvd

ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ ಅಧಿಕಾರಿಗಳು ಎಸ್‌ಐಟಿಯಿಂದ ಔಟ್‌? | Dharmasthala Village Case Two Ips Officers Removed From Sit Gvd



ಧರ್ಮಸ್ಥಳ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್‌ ಅಧಿಕಾರಿಗಳು ಈ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ.

ಬೆಂಗಳೂರು (ಜು.21): ಧರ್ಮಸ್ಥಳ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್‌ ಅಧಿಕಾರಿಗಳು ಈ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರ ಪ್ರಕರಣದ ಸಮಗ್ರ ತನಿಖೆ ಸಂಬಂಧ ನಾಲ್ವರು ಐಪಿಎಸ್‌ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ರಚಿಸಿದೆ. ಇದರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ವೈಯಕ್ತಿಕ ಕಾರಣ ಮುಂದಿಟ್ಟುಕೊಂಡು ತನಿಖಾ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣದ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸಿದೆ. ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆಯಲ್ಲಿ ತೋರಿದ ಕರ್ತವ್ಯ ನಿಷ್ಠೆ ಹಾಗೂ ಕಾರ್ಯ ದಕ್ಷತೆ ಆಧರಿಸಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಈ ಎಸ್‌ಐಟಿಗೆ ಆಯ್ಕೆ ಮಾಡಿದೆ. ಇದೀಗ ಎಸ್‌ಐಟಿಯಿಂದ ಇಬ್ಬರು ಐಪಿಎಸ್‌ ಅಧಿಕಾರಿಗಳು ಹೊರಬರಲು ಮನಸ್ಸು ಮಾಡಿದ್ದಾರೆ. ಒಂದು ವೇಳೆ ಅವರು ಈ ಎಸ್‌ಐಟಿಯಿಂದ ತಮ್ಮನ್ನು ಕೈ ಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದರೆ, ಸರ್ಕಾರ ಆ ಇಬ್ಬರು ಅಧಿಕಾರಿಗಳನ್ನು ಕರೆಸಿ ಮನವೊಲಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಧರ್ಮಸ್ಥಳ ಕೇಸ್‌ ಎನ್‌ಐಎಗೆ ವಹಿಸಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ, ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂದೋಶ್‌ ಕುಮಾರ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ತಾವೇ ಹಲವು ಶವಗಳನ್ನು ಹೂತುಹಾಕಿದ್ದಾಗಿ ದೇವಸ್ಥಾನದ ಮಾಜಿ ಸ್ವಚ್ಛತಾ ಕರ್ಮಿಯೊಬ್ಬರು ಹೇಳಿಕೆ ನೀಡಿರುವ ಬೆನ್ನಲ್ಲೇ ಪತ್ರ ಬರೆದಿರುವ ಸಂಸದ, ‘ಇತ್ತೀಚಿನ ಬೆಳವಣಿಗೆಗಳು ನಿರ್ಲಕ್ಷಿಸಲಾಗದ ವಾಸ್ತವವನ್ನು ಮುನ್ನೆಲೆಗೆ ತಂದಿವೆ. ವರ್ಷಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿಲ್ಲ’ ಎಂದು ಆರೋಪಿಸಿ, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ.

ಪರಂ ಸ್ಪಷ್ಟನೆ:ಈ ನಡುವೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ‘ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದು’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೂರುದಾರನ ದೂರಿಗೆ ಸಂಬಂಧಿಸಿ ಈಗಾಗಲೇ ಪ್ರಾಥಮಿಕ ತನಿಖೆ ಆರಂಭವಾಗಿದೆ. ಹೆಚ್ಚಿನ ತನಿಖೆ ಅಗತ್ಯವಿದ್ದರೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ, ಪ್ರಾಥಮಿಕ ತನಿಖೆ ನಡೆಯುತ್ತಿರುವ ಮಧ್ಯೆಯೇ ಎಸ್‌ಐಟಿ ತನಿಖೆಗೆ ಒತ್ತಾಯಿಸಿದರೆ, ಪೊಲೀಸ್‌ ಇಲಾಖೆ ಇರುವುದೇಕೆ? ಎಂದು ಪ್ರಶ್ನಿಸಿದರು. ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಪೊಲೀಸ್‌ ಇಲಾಖೆ ತನಿಖೆ ನಡೆಸುತ್ತಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಅಗತ್ಯಗಳನ್ನು ನೋಡಿಕೊಂಡು ಮುಂದೆ ಯಾವಕ್ರಮ ಕೈಗೊಳ್ಳಬೇಕೆಂದು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.



Source link

Leave a Reply

Your email address will not be published. Required fields are marked *