ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
ಮೈಸೂರು (ಜು.04): ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ನಗರದ ಚಾಮುಂಡಿಬೆಟ್ಟಕ್ಕೆ ಗುರುವಾರ ಭೇಟಿ ನೀಡಿ, ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಬರುವ ಭಕ್ತರಿಗೂ ಸಮಸ್ಯೆ ಆಗಬಾರದು.
ತಿರುಪತಿ ತಿರುಮಲ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧಿಸಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೆಯೋ ಚಾಮುಂಡೇಶ್ವರಿ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿಗೊಳಿಸಬೇಕು ಎಂದರು. ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳು, ಕೋತಿಗಳ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಹುಲಿ ಸಾವಿನ ಬಗ್ಗೆ ಚಾಮರಾಜನಗರದ ಯಾವುದೇ ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿಲ್ಲ.
ಇದೊಂದು ಗಂಭೀರ ಸಮಸ್ಯೆಯಾಗಿದ್ದು ಯಾಕೆ ಅವರಿಗೆ ಅರ್ಥ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರದ ಬಗ್ಗೆ ಕೂಡ ಸದನದಲ್ಲಿ ನಾನೊಬ್ಬನೇ ದನಿ ಎತ್ತುತ್ತಿದ್ದೇನೆ. ಚಾಮರಾಜನಗರ ಜನಪ್ರತಿನಿಧಿಗಳು ಇನ್ನಾದರೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣ ಸಂಬಂಧ ಅರಣ್ಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಬೇಕು. ಇನ್ನು, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಾನೇನೂ ಹೇಳಲಾರೆ. ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ಹೈಕಮಾಂಡ್ ಸೂಕ್ತ ನಿರ್ಧಾರ ಮಾಡಲಿದೆ ಎಂದರು.
ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ವಾಯತ್ತೆ ನೀಡುವಂತೆ ಮನವಿ: ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತು 17 ವರ್ಷವಾದರೂ ಅದಕ್ಕೆ ಸ್ವಾಯತತ್ತೆ ಲಭಿಸಿಲ್ಲ. ಕೂಡಲೇ ಶಿಕ್ಷಣ ಸಚಿವಾಲಯದ ಜೊತೆ ಚರ್ಚಿಸಿ ಸ್ವಾಯತ್ತತೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಸಂಸದೀಯ ಸಮಿತಿ ಅಧ್ಯಕ್ಷ ಶ್ರೀರಂಗ್ ಅಪ್ಪ ಚಂದು ಬರ್ನೆ ಅವರಿಗೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಸಲ್ಲಿಸಿದರು. ಇತ್ತೀಚೆಗೆ ನಗರದ ಅರಮನೆ ಮಂಡಳಿ ಕಚೇರಿಗೆ ಭೇಟಿ ನೀಡಿದ್ದ ತಂಡಕ್ಕ್ಕೆ ಮನವಿ ಸಲ್ಲಿಸಿದ ಅವರು, ಈಗಾಗಲೇ 17 ವರ್ಷವಾದರೂ ಶಾಸ್ತ್ರೀಯ ಕನ್ನಡ ಭಾಷಾ ಕೇಂದ್ರಕ್ಕೆ ಸ್ವಾಯತ್ತತೆ ನೀಡಿಲ್ಲ. ಇಲ್ಲಿನ ಕೇಂದ್ರೀಯ ಭಾಷಾ ಸಂಶೋಧನಾ ಸಂಸ್ಥೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರಕ್ಕೆ ಅಗತ್ಯ ಅನುದಾನ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸಬೇಕು.
ಸಂಶೋಧನೆ, ಪ್ರಕಟಣೆ ಮತ್ತಿತರ ಕಾರ್ಯಗಳಿಗೆ ನೆರವಾಗಲು ಸ್ವಾಯತ್ತತೆ ಅಗತ್ಯ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕೇಂದ್ರವು ಯೋಜನಾ ನಿರ್ದೇಶಕರು, 11 ಮಂದಿ ಶೈಕ್ಷಣಿಕ ಸಿಬ್ಬಂದಿ ಮತ್ತು 8 ಮಂದಿ ಆಡಳಿತಾತ್ಮಕ ಸಿಬ್ಬಂದಿಯನ್ನು ಒಗೊಂಡಿದೆ. ಪ್ರತಿ ವರ್ಷವು ಕೇಂದ್ರ ಸಾಕಷ್ಟು ಶೈಕ್ಷಣಿಕ ಮತ್ತು ಸಂಶೋಧನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಂಡಿರುತ್ತದೆ. ಇದರಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಲು ಸ್ವಾಯತ್ತತೆ ಅಗತ್ಯ ಎಂದರು. ತಮಿಳಿಗೆ 2004ರಲ್ಲಿ ಶಾಸ್ತ್ರೀಯ ಸ್ಥಾನಮಾನ ನೀಡಿ, 2008ರಲ್ಲಿಯೇ ಸ್ವಾಯತ್ತತೆ ನೀಡಲಾಯಿತು. ಆದರೆ ಕನ್ನಡಕ್ಕೆ 2008ರಲ್ಲಿ ಶಾಸ್ತ್ರೀಯ ಸ್ಥಾನಾಮಾನ ದೊರೆತರು ಈವರೆಗೂ ಸ್ವಾಯತ್ತತೆ ನೀಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.