
<p><strong>ಚಿಕ್ಕಮಗಳೂರು (ಜ.23): </strong>ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸರಣಿ ಲಾರಿ ಅಪಘಾತಗಳು ಸಂಭವಿಸಿದ್ದು, ವಾಹನ ಸವಾರರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಘಾಟ್ನ ತಿರುವಿನಲ್ಲಿ ಲಾರಿಗಳು ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.</p><h2>ಘಾಟ್ನಲ್ಲಿ ಸರಣಿ ಅಪಘಾತಗಳ ಆತಂಕ</h2><p>ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮಧ್ಯಾಹ್ನವಷ್ಟೇ ಗ್ಯಾಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಈ ಘಟನೆಯ ಬಳಿಕ ಸಂಜೆ ಮತ್ತೆರಡು ಲಾರಿಗಳು ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿವೆ. ಮಧ್ಯಾಹ್ನದಿಂದ ಸಂಜೆಯವರೆಗೆ ಸರಣಿ ಅಪಘಾತಗಳು ಸಂಭವಿಸಿರುವುದು ಘಾಟ್ ರಸ್ತೆಯ ಅಪಾಯಕಾರಿ ರಸ್ತೆಯಲ್ಲಿ ಪ್ರಯಾಣಿಸಲು ಹೆದರುವಂತಾಗಿದೆ.</p><h3>ಐದು ಕಿಲೋಮೀಟರ್ ಟ್ರಾಫಿಕ್ ಜಾಮ್</h3><p>ಲಾರಿಗಳು ರಸ್ತೆಯ ಮಧ್ಯೆಯೇ ಪಲ್ಟಿಯಾಗಿರುವುದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಯ ಎರಡೂ ಬದಿಗಳಲ್ಲಿ ಐದು ಕಿಲೋಮೀಟರ್ಗಿಂತಲೂ ಹೆಚ್ಚು ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಪ್ರವಾಸಿಗರು, ಸರಕು ಸಾಗಣೆ ವಾಹನಗಳು ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿಕೊಂಡು ಪರದಾಡುವಂತಾಗಿದೆ.</p><h3>ರಸ್ತೆ ಬಂದ್ ಮಾಡಿದ ಬಣಕಲ್ ಪೊಲೀಸರು</h3><p>ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಕೂಡಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಕೊಟ್ಟಿಗೆಹಾರದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ವಾಹನಗಳು ಘಾಟ್ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.</p><h3>ಪರ್ಯಾಯ ಮಾರ್ಗದ ಮೊರೆ ಹೋಗಲು ಸೂಚನೆ</h3><p>ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಲಾರಿಗಳನ್ನು ಕ್ರೇನ್ ಮೂಲಕ ತೆರವುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಆದರೆ ಲಾರಿಗಳ ತೆರವು ಕಾರ್ಯ ವಿಳಂಬವಾಗುವ ಸಾಧ್ಯತೆ ಇರುವುದರಿಂದ, ವಾಹನ ಸವಾರರು ಚಾರ್ಮಾಡಿ ಘಾಟ್ ರಸ್ತೆಯ ಬದಲಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.</p>
Source link
ಮೃತ್ಯುಪಾಶವಾದ ಚಾರ್ಮಾಡಿ ಘಾಟ್: ಒಂದೇ ದಿನ ಮೂರು ಲಾರಿಗಳು ಪಲ್ಟಿ, ಹೆದ್ದಾರಿಯಲ್ಲಿ ನೂರಾರು ವಾಹನಗಳು ಲಾಕ್!