
ವಿಧಾನಸಭೆಯಲ್ಲಿ, ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ಅವರು ಎತ್ತಿನಹೊಳೆ ಕಾಮಗಾರಿ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ‘ಭಾವಿ ಮುಖ್ಯಮಂತ್ರಿ’ ಎಂದು ಸಂಬೋಧಿಸಿ, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
– ಬೇಲೂರು ಕ್ಷೇತ್ರದ ಸಮಸ್ಯೆ ಬಗ್ಗೆ ಸುರೇಶ್ ಪ್ರಸ್ತಾಪ
ವಿಧಾನಸಭೆ (ಮಾ.12): ಬೇಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಮಸ್ಯೆ ಕುರಿತು ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ಅವರು ಸರ್ಕಾರದ ಗಮನ ಸೆಳೆಯುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭಾವಿ ಮುಖ್ಯಮಂತ್ರಿ ಎಂದು ಸಂಬೋಧಿಸಿ, ತಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು.
ಎತ್ತಿನಹೊಳೆ ಕಾಮಗಾರಿಯಿಂದಾಗಿ ರಸ್ತೆ ಸಂಪರ್ಕ ಹಾಳಾಗಿರುವುದನ್ನು ಸರಿಪಡಿಸಬೇಕು ಎಂದು ಮನವಿ ಮಾಡುತ್ತಾ, ಭಾವಿ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್ ಅವರು ನಮ್ಮ ಕ್ಷೇತ್ರದ ಸಮಸ್ಯೆ ನಿವಾರಿಸಲು ಮನಸು ಮಾಡಬೇಕು. ಎತ್ತಿನಹೊಳೆ ಕಾಮಗಾರಿಯಿಂದ ಬೇಲೂರು ಕ್ಷೇತ್ರದಲ್ಲಾಗಿರುವ ಸಮಸ್ಯೆಗಳನ್ನು ನಿವಾರಿಸಲು 500 ಕೋಟಿ ರು. ಅನುದಾನಕ್ಕಾಗಿ ಬೇಡಿಕೆಯಿಟ್ಟಿದ್ದೆ. ಅದರಲ್ಲಿ ಈ ಹಿಂದೆ 35 ಕೋಟಿ ರು. ನೀಡಿದ್ದರು. ಅದರ ಜತೆಗೆ ಈಗ 50 ಕೋಟಿ ರು. ನೀಡುವುದಾಗಿ ಭಾವಿ ಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಆ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಕೋರಿದರು.
ಅದಕ್ಕೆ ಡಿ.ಕೆ.ಶಿವಕುಮಾರ್, ಎತ್ತಿನಹೊಳೆ ಯೋಜನೆಗಾಗಿ ಸಕಲೇಶಪುರ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿದ್ದೇವೆ. ಈಗ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಎತ್ತಿನಹೊಳೆ ಯೋಜನೆಗಾಗಿ ಇದ್ದ ತಡೆ ನಿವಾರಿಸಿ, ಅರಣ್ಯ ಭೂಮಿ ಬಳಕೆಗೆ ಅನುಮತಿಸಿದೆ ಎಂಬ ಮಾಹಿತಿಯಿದೆ. ಆ ಹಿನ್ನೆಲೆಯಲ್ಲಿ ಯೋಜನೆಯನ್ನು ಮುಂದುವರಿಸಬೇಕು. ಅದರ ಕ್ಷೇತ್ರಗಳ ಸಮಸ್ಯೆಗಳಿಗೂ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.