ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರ ಫೋಟೋ ಮತ್ತು ಆಡಿಯೋ ಎಡಿಟ್ ಮಾಡಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ. ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ಡಿಜಿಟಲ್ ಪುರಾವೆಗಳನ್ನು ಜಪ್ತಿ ಮಾಡೀದ್ದಾರೆ.
ಮೈಸೂರು (ಫೆ.21): ಮುಡಾ ಮಾಜಿ ಆಯುಕ್ತ ಹಾಗೂ ಹಿರಿಯ ಕೆಎಎಸ್ ಅಧಿಕಾರಿ ಡಿಬಿ ನಟೇಶ್ ಅವರ ಫೋಟೋ ಮತ್ತು ಆಡಿಯೋ ತುಣುಕು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರ ತಂಡವು ಸ್ನೇಹಮಯಿ ಕೃಷ್ಣ ಅವರಿಗೆ ಸಂಬಂಧಿಸಿದ ಎರಡು ಮನೆ ಹಾಗೂ ಒಂದು ಕಚೇರಿಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ತಪಾಸಣೆ ನಡೆಸಿದೆ.
ನಾಲ್ಕು ಗಂಟೆಗಳ ಕಾಲ ತಲಾಷ್; ಮಹತ್ವದ ದಾಖಲೆ ಜಪ್ತಿ
ಶುಕ್ರವಾರ ಮಧ್ಯಾಹ್ನ 2:30ಕ್ಕೆ ಆರಂಭವಾದ ಈ ತಲಾಷ್ ಸಂಜೆ 6:30ರ ವರೆಗೆ ಸತತ ನಾಲ್ಕು ಗಂಟೆಗಳ ಕಾಲ ಮುಂದುವರಿಯಿತು. ಅಧಿಕಾರಿಗಳು ಪ್ರತಿಯೊಂದು ಮೂಲೆಯನ್ನು ಜಾಲಾಡಿದ್ದು, ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸರ ವಶದಲ್ಲಿದ್ದು, ತನಿಖೆ ತೀವ್ರಗೊಂಡಿದೆ.
ಜಪ್ತಿಯಾದ ದಾಖಲೆಗಳ ಪಟ್ಟಿ: ಸುವರ್ಣ ನ್ಯೂಸ್ಗೆ ಲಭ್ಯ
ಸ್ನೇಹಮಯಿ ಕೃಷ್ಣ ಅವರ ಮನೆಯಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕ ಮಹತ್ವದ ದಾಖಲೆಗಳ ಪಟ್ಟಿ ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ಲಭ್ಯವಾಗಿದ್ದು, ಜಪ್ತಿಯಾದ ವಸ್ತುಗಳ ವಿವರ ಹೀಗಿದೆ:
- 16 GB ಸಾಮರ್ಥ್ಯದ ಕೆಂಪು ಬಣ್ಣದ ಪೆನ್ಡ್ರೈವ್.
- ನೇರಳೆ ಬಣ್ಣದ ರೆಡ್ಮಿ ಫೋನ್ (ಸ್ವಿಚ್ ಆಫ್ ಸ್ಥಿತಿಯಲ್ಲಿತ್ತು).
- ಸಿಲ್ವರ್ ಬಣ್ಣದ ಐಫೋನ್ (ಸ್ಕ್ರೀನ್ ಒಡೆದು ಹೋಗಿತ್ತು).
- ಲೆನೆವೋ ಕಂಪನಿಯ ಐಪ್ಯಾಡ್.
- ಒಂದು ಮೈಕ್ರೋ ಎಸ್ಡಿ ಕಾರ್ಡ್.
- ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿದ್ದ 20 ಪುಟಗಳ ದಾಖಲೆಗಳು.
- 1 TB ಸಾಮರ್ಥ್ಯದ ಹಾರ್ಡ್ ಡಿಸ್ಕ್.
ಸೀಲ್ ಆದ ದಾಖಲೆಗಳು, ಮುಂದೇನು?
ದಾಳಿಯ ವೇಳೆ ಸಿಕ್ಕ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ದಾಖಲೆಗಳನ್ನು ಸಿಸಿಬಿ ಪೊಲೀಸರು ಸ್ಥಳದಲ್ಲೇ ಸೀಲ್ ಮಾಡಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಡಿಜಿಟಲ್ ಪುರಾವೆಗಳನ್ನು ಎಫ್ಎಸ್ಎಲ್ (FSL) ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ. ನಕಲಿ ಆಡಿಯೋ ತುಣುಕು ಸೃಷ್ಟಿಸಿದವರ ಹಿಂದೆ ಯಾರಿದ್ದಾರೆ ಮತ್ತು ಇದರ ಉದ್ದೇಶವೇನಿತ್ತು ಎಂಬುದು ಸಿಸಿಬಿ ವಿಚಾರಣೆಯಿಂದ ಹೊರಬರಬೇಕಿದೆ.
