
ದಕ್ಷಿಣ ಕನ್ನಡದ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ತಲೆಬುರುಡೆ ಮತ್ತು ಅಸ್ಥಿಪಂಜರವು ಹೊಸ ತಿರುವು ಪಡೆದಿದೆ. ಸ್ಥಳದಲ್ಲಿ ಸಿಕ್ಕ ಗುರುತಿನ ಚೀಟಿಯ ಆಧಾರದ ಮೇಲೆ, ಇದು ಏಳು ವರ್ಷಗಳ ಹಿಂದೆ ಕೊಡಗಿನಿಂದ ನಾಪತ್ತೆಯಾಗಿದ್ದ ಯು.ಬಿ. ಅಯ್ಯಪ್ಪ ಅವರದ್ದಾಗಿರಬಹುದು ಎಂದು ಶಂಕಿಸಲಾಗಿದೆ.
ದಕ್ಷಿಣ ಕನ್ನಡ (ಸೆ.18): ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ತಲೆಬುರುಡೆ ಮತ್ತು ಅಸ್ಥಿಪಂಜರ ಇದೀಗ ಹೊಸ ತಿರುವು ಪಡೆದಿದೆ. ಸ್ಥಳದಲ್ಲಿ ಸಿಕ್ಕ ಗುರುತಿನ ಚೀಟಿಯಿಂದಾಗಿ ಇದು ಕೊಡಗು ಮೂಲದ, ಏಳು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಇರಬಹುದು ಎಂದು ಶಂಕಿಸಲಾಗಿದೆ.
ಧರ್ಮಸ್ಥಳದ ಬಳಿಯ ಬಂಗ್ಲೆಗುಡ್ಡದಲ್ಲಿ ತಲೆಬುರುಡೆ ಮತ್ತು ಅಸ್ಥಿಪಂಜರ ಸಿಕ್ಕ ಸ್ಥಳದಲ್ಲಿ ಪೊಲೀಸರಿಗೆ ಒಂದು ಹಳೆಯ ಗುರುತಿನ ಚೀಟಿ ದೊರಕಿದೆ. ಆ ಗುರುತಿನ ಚೀಟಿ ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (U.B. Ayyappa) ಎಂಬುವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಏಳು ವರ್ಷದ ಹಿಂದಿನ ಪ್ರಕರಣ:
ಅಯ್ಯಪ್ಪ ಅವರು ಏಳು ವರ್ಷಗಳ ಹಿಂದೆ ಮೈಸೂರಿಗೆ ಚಿಕಿತ್ಸೆಗೆಂದು ಬಂದವರು ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಕೊಡಗಿನ ಕುಟ್ಟ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು. ಆದರೆ, ಇಷ್ಟು ವರ್ಷಗಳಾದರೂ ಅಯ್ಯಪ್ಪ ಅವರ ಸುಳಿವು ಸಿಕ್ಕಿರಲಿಲ್ಲ.
ಈಗ ಸಿಕ್ಕಿರುವ ಗುರುತಿನ ಚೀಟಿ ಮತ್ತು ಸ್ಥಳದಲ್ಲಿ ಪತ್ತೆಯಾದ ಅಸ್ಥಿಪಂಜರ, ನಾಪತ್ತೆಯಾಗಿದ್ದ ಅಯ್ಯಪ್ಪ ಅವರದ್ದೇ ಇರಬಹುದು ಎಂಬ ಬಲವಾದ ಅನುಮಾನ ಮೂಡಿಸಿದೆ. ಪೊಲೀಸರು ಅಸ್ಥಿಪಂಜರವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದು, ಗುರುತಿನ ಚೀಟಿ ಮತ್ತು ಅಸ್ಥಿಪಂಜರದ ಡಿಎನ್ಎ ಪರೀಕ್ಷೆ ಮೂಲಕ ಇದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದ್ದಾರೆ. ಈ ಪರೀಕ್ಷೆಯ ವರದಿ ಬಂದ ನಂತರವೇ ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತಿಳಿಯಲಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.