
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ಗಾಗಿ ಹಿರಿಯ ಮುಖಂಡ ಕೃಷ್ಣಮೂರ್ತಿ ಪವಾರ್ ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಒತ್ತಾಯದ ಮೇರೆಗೆ ಕಾಂಗ್ರೆಸ್ನಿಂದ ಎ.ಆರ್.ಎಂ.ಹುಸೇನ್ ಆಕಾಂಕ್ಷಿಯಾಗಿದ್ದಾರೆ.
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾನು ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದು, ದಶಕಗಳ ಪಕ್ಷನಿಷ್ಠೆಯನ್ನು ಗುರುತಿಸಿ, ಸಾಮಾನ್ಯ ಕಾರ್ಯಕರ್ತನಾದ ನನಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಎಂ.ಪಿ.ಕೃಷ್ಣಮೂರ್ತಿ ಪವಾರ್ ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮೂಲಕ ಸಮಾಜಕ್ಕೋಸ್ಕರ ನನ್ನ ಸೇವೆ ಸಲ್ಲಿಸಿದ್ದು, ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದೇನೆ. 90ರ ದಶಕದಲ್ಲಿ ಅವಿಭಜಿತ ಚಿತ್ರದುರ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದೆ. 1998ರಲ್ಲಿ ದಾವಣಗೆರೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷನಾಗಿದ್ದೆ. 2004ರಲ್ಲಿ ರಾಜ್ಯ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಪಕ್ಷದ ಜವಾಬ್ಧಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೇನೆ. ದಶಕಗಳ ಹಿಂದೆ ದಾವಣಗೆರೆಯ ಗೋಲಿಬಾರ್ನಲ್ಲಿ ಗಾಯಗೊಂಡ ರಾಮಭಕ್ತರಿಗೆ ಚಿಕಿತ್ಸೆ ಕೊಡಿಸಿದ್ದೇನೆ. ಆ ಬಳಿಕ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗವನ್ನ ಸ್ಥಾಪಿಸಿ ಸೇವೆ ಮಾಡಿದ್ದೇನೆ ಎಂದರು.
ಮುಸ್ಲಿಮನಾದ ನನಗೇ ದಾವಣಗೆರೆ ದಕ್ಷಿಣ ಕೈ ಟಿಕೆಟ್ ನೀಡಿ: ಹುಸೇನ್
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಸಮಾಜದ ಮುಖಂಡರು, ಧರ್ಮಗುರುಗಳ ಮೂಲಕ ಮನವಿ ಮಾಡಲಾಗಿದೆ. ನಾನು ಸಹ ಟಿಕೆಟ್ ಆಕಾಂಕ್ಷಿ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎ.ಆರ್.ಎಂ.ಹುಸೇನ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 35 ವರ್ಷಗಳಿಂದ ಪಕ್ಷದ ವಿವಿಧ ಹಂತಗಳಲ್ಲಿ ಹುದ್ದೆ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸಿದ್ದು, ಈಗ ಕೆಪಿಸಿಸಿ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಮುಸ್ಲಿಂ ಸಮಾಜದ ಧರ್ಮಗುರುಗಳು, ಮುಖಂಡರು, ಸಮಾಜ ಬಾಂಧವರು ಸಭೆ ಮಾಡಿ ದಕ್ಷಿಣದ ಉಪ ಚುನಾವಣೆಗೆ ಮುಸ್ಲಿಮರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಅದರಂತೆ ಈ ಉಪ ಚುನಾವಣೆಯಲ್ಲಿ ತಾವೂ ಆಕಾಂಕ್ಷಿಯಾಗಿದ್ದು, ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದೇನೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಮುಸ್ಲಿಮರಿಗೆ ಅವಕಾಶ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.