ಉತ್ತರ ಕನ್ನಡ, ಡಿಸೆಂಬರ್ 10: ಜಿಲ್ಲೆ ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766 (ಇ) ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಕಾಮಗಾರಿ ಹಿನ್ನಲೆಯಲ್ಲಿ ಈ ಮಾರ್ಗದಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧಿಸಿ ಬರೋಬ್ಬರಿ ಒಂದು ವರ್ಷ ಕಳೆದಿದೆ. ಹೀಗಿದ್ದರೂ ಘನ ವಾಹನಗಳ ಸಂಚಾರಕ್ಕೆ ರಸ್ತೆ ಲಭ್ಯವಾಗದ ಕಾರಣ ಜನಾಕ್ರೋಶ ಕೇಳಿಬಂದಿದೆ. ಕೆಲ ಸಂಘಟನೆಗಳು ಜಂಟಿ ಹೋರಾಟ ನಡೆಸಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿವೆ.
ಶಿರಸಿ-ಕುಮಟಾ ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನಲೆ 2024ರ ನವೆಂಬರ್ ತಿಂಗಳಿನಲ್ಲಿ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆರು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸೋದಾಗಿ ಗುತ್ತಿಗೆ ಪಡೆದ RNS ಕಂಪನಿಯೂ ಭರವಸೆ ಕೊಟ್ಟಿತ್ತು. ಆದರೆ ಕಾಮಗಾರಿ ಆರಂಭವಾಗಿ ವರ್ಷ ಕಳೆಯುತ್ತಾ ಬಂದರೂ ವಾಹನ ಸಂಚಾರಕ್ಕೆ ಮಾತ್ರ ಈ ರಸ್ತೆ ಮುಕ್ತವಾಗಿಲ್ಲ. ಹೀಗಿದ್ದರೂ ಈ ರಸ್ತೆಯಲ್ಲಿ ಕೆಲ ಖಾಸಗಿ ಬಸ್ಗಳು ಸಂಚಾರ ನಡೆಸುತ್ತಿರುವ ಕಾರಣ, ಸರ್ಕಾರಿ ಬಸ್ಗಳಿಗೆ ಅವಕಾಶ ಕೊಡಿ ಎಂಬ ಆಗ್ರಹ ವ್ಯಕ್ತವಾಗಿದೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಭಾಗದ ಕೆಲವು ಸಂಘಟನೆಗಳು ಜಂಟಿಯಾಗಿ ಹೋರಾಟ ನಡೆಸಿದ್ದು, ನಿಧಾನಗತಿಯ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ: ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ಗಲಾಟೆ; ಮಾದಕವಸ್ತು ಕೊಟ್ಟಿಲ್ಲವೆಂದು ಟಿವಿ ಒಡೆದು ದಾಂಧಲೆ
ಶಿರಸಿ-ಕುಮಟಾ ಮಾರ್ಗವಾಗಿ ಮಂಗಳೂರು ಕಡೆಯಿಂದ ಓಡಾಟ ನಡೆಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗಳಿಗೆ ಪರ್ಯಾಯ ಮಾರ್ಗಗಳನ್ನು ಮುಚ್ಚಲಾಗಿದೆ. ಆದರೆ ಆ ರಸ್ತೆಗಳು ದುರ್ಗಮವಾಗಿರುವ ಕಾರಣಕ್ಕೆ ಸರಿಯಾದ ಸಮಯಕ್ಕೆ ಬಸ್ ಸಿಗದೆ ಜನರು ಪರದಾಟ ನಡೆಸುತ್ತಿದ್ದಾರೆ. ಘನ ವಾಹನಗಳ ಸಂಚಾರಕ್ಕೆ ನಿಷೇಧವಿರುವ ರಸ್ತೆಯಲ್ಲೇ ಕೆಲ ಖಾಸಗಿ ಬಸ್ಗಳು ಸಂಚಾರ ನಡೆಸುತ್ತಿದ್ದರೂ ಈ ಭಾಗದಲ್ಲಿ ನಿಲುಗಡೆ ಕೊಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ವಾಣಿಜ್ಯ ಹಾಗೂ ಜನರ ದೃಷ್ಟಿಯಿಂದ ಕುಮಟಾ-ಶಿರಸಿ ಮಾರ್ಗ ತುಂಬಾ ಅತ್ಯವಶ್ಯಕವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.