ಬೆಳಗಾವಿ, ಡಿಸೆಂಬರ್ 8: ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ (ಸಿದ್ದರಾಮಯ್ಯ) ಅವರ ಪುತ್ರ, ಕಾಂಗ್ರೆಸ್ ಎಂಎಲ್ ಸಿ ಯತೀಂದ್ರ (ಯತೀಂದ್ರ ಸಿದ್ದರಾಮಯ್ಯ) ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ‘ಟಿವಿ9’ ಜತೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ ಎಂದರು.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ನಮ್ಮಲ್ಲಿ ಯಾವುದೇ ಕಿತ್ತಾಟ ಇಲ್ಲ. ಆ ರೀತಿಯ ವದಂತಿಯನ್ನು ಪ್ರತಿಪಕ್ಷದವರು ಹುಟ್ಟು ಹಾಕಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಿದ್ದಾರೆಂದು ಹೇಳುತ್ತಿದ್ದಾರೆ. ಆದರೆ, ಬದಲಾಗುತ್ತಾರೆ ಸಿಎಂ ಎಂಬ ಕನಸು ಕಾಣಬೇಕಷ್ಟೇ ಎಂದು ಯತೀಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ ವಿಶ್ವಾಸ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸುತ್ತಾರೆ ಎಂಬ ವೈಯಕ್ತಿಕ ನಂಬಿಕೆ ನನಗಿದೆ. ದೆಹಲಿಯಲ್ಲಿಯೂ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಹೈಕಮಾಂಡ್ ನಾಯಕರು ಕರೆದಿಲ್ಲ ಎಂದು ಯತೀಂದ್ರ ಸ್ಪಷ್ಟಪಡಿಸಿದ್ದಾರೆ.
ಕುತೂಹಲ ಮೂಡಿಸಿದ ಯತೀಂದ್ರ ಹೇಳಿಕೆ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಎರಡೆರಡು ‘ಬ್ರೇಕ್ ಫಾಸ್ಟ್ ಮೀಟಿಂಗ್’ ನಡೆಸಿ ಒಗ್ಗಟ್ಟು ಪ್ರದರ್ಶಿಸಿದರು. ಆದ ನಂತರ, ನಾಯಕತ್ವ ಬದಲಾವಣೆ ವಿಚಾರ ಏನಿದ್ದರೂ ಹೈಕಮಾಂಡ್ಗೆ ಬಿಟ್ಟಿದ್ದೇವೆ ಎಂದಿದ್ದರು. ಇಷ್ಟಾದ ನಂತರ ಇದೀಗ, ಸಿದ್ದರಾಮಯ್ಯ 5 ವರ್ಷ ನಡೆಯಲಿದೆ ಎಂದು ಯತೀಂದ್ರ ಬಹಿರಂಗ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್
ಮತ್ತೊಂದೆಡೆ, ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರವಾಗಿ ಕೆಲವು ದಿನಗಳ ಹಿಂದಷ್ಟೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈಕಮಾಂಡ್ ನಾಯಕರು ಮಾತುಕತೆ ನಡೆಸಿದ್ದರು. ಸಭೆಯಲ್ಲಿ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಇದ್ದರು. ಇದಾದ ನಂತರ ಮತ್ತೊಂದು ಸಭೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿದವು. ಅಷ್ಟಾದರೂ, ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿಲ್ಲ ಎಂದು ಯತೀಂದ್ರ ಹೇಳಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ